NEWS

ಫೆ. 21 ರಿಂದ  22 ವರೆಗೆ ವಿಜೃಂಭಣೆಯಿಂದ ಬೂದನೂರು ಉತ್ಸವ ಆಚರಣೆ

ಬೂದನೂರು ಉತ್ಸವದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ: ರವಿಕುಮಾರ್

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ್ನು ನೀಡಲು ಬೂದನೂರಿನ ಕಾಶಿವಿಶ್ವನಾಥಸ್ವಾಮಿ ಹಾಗೂ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಆವರಣದಲ್ಲಿ ಫೆಬ್ರವರಿ 21 ರಿಂದ 22 ವರೆಗೆ ಅದ್ದೂರಿಯಾಗಿ ಬೂದನೂರು ಉತ್ಸವ ಆಚರಣೆ ಮಾಡಲಾಗುತ್ತದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ರವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಬೂದನೂರು ಉತ್ಸವ ಆಚರಣೆ ಸಂಭದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಬಾರಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದ್ದರಿಂದ 2025 ನೇ ಸಾಲಿನಲ್ಲಿ ಬೂದನೂರು ಉತ್ಸವ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಸದರಿ ವರ್ಷ ಬೂದನೂರು ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಹೇಳಿದರು.

 ನಾಳೆಯಿಂದ ಉತ್ಸವದ ಕಾರ್ಯಗಳು ಪ್ರಾರಂಭವಾಗಲಿ ಉತ್ಸವ ನಡೆಯುವ ಸ್ಥಳವನ್ನು ಸ್ವಚ್ಛಗೊಳಿಸಿ. ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆಯೋಜಿಸಲಾಗಿರುವ ಉತ್ಸವ ಇದರಲ್ಲಿ ಯಾವುದೇ ರಾಜಕೀಯ ಬೇಡ ಎಲ್ಲರೂ ಒಗ್ಗಟ್ಟಾಗಿ ಉತ್ಸವ ಆಚರಣೆ ಮಾಡೋಣ, ವೇದಿಕೆ ಸಮಿತಿ, ಸ್ವಾಗತ ಸಮಿತಿ ಸಾಂಸ್ಕೃತಿಕ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ ಉತ್ಸವದ ಆಚರಣೆ ಪೂರ್ವ ಸಿದ್ಧತಾ ಮಾಡಿಕೊಳ್ಳಿ ಎಂದು ಹೇಳಿದರು.

ಟ್ಯಾಬ್ಲೊ ಮೆರವಣಿಗೆ

ಕನ್ನಡ ಸಾಹಿತ್ಯ ಸಮ್ಮೇಳನದ “ಕನ್ನಡ ರಥ”ದ  ಮಾದರಿಯಂತೆ ಬೂದನೂರಿನ  ಕಾಶಿವಿಶ್ವನಾಥಸ್ವಾಮಿ ಹಾಗೂ ಅನಂತಪದ್ಮನಾಭಸ್ವಾಮಿ ದೇವಸ್ಥಾನದ ಇತಿಹಾಸ ಸಾರುವ ಟ್ಯಾಬ್ಲೊ ನಿರ್ಮಾಣ ಮಾಡಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲೂ ಟ್ಯಾಬ್ಲೊ ಮೆರವಣಿಗೆ ಮಾಡುವು ಮೂಲಕ ಉತ್ಸವ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಕಲಾವಿದರು ಹಾಗೂ ಗ್ರಾಮೀಣ ಆಟಗಳಿಗೆ ಪ್ರಾಮುಖ್ಯತೆ

ಬೂದನೂರು ಉತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಹಾಗಾಗಿ ಜಿಲ್ಲೆಯ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತದೆ. ಬೂದನೂರು ಉತ್ಸವದ ಅಂಗವಾಗಿ ದೇಸಿ ಆಟಗಳಾದ ಕಬ್ಬಡ್ಡಿ, ಮಡಿಕೆ ಹೊಡೆಯುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚಿತ್ರ ಕಲೆ ಸ್ಪರ್ಧೆ ಸೇರಿದಂತೆ ಇನ್ನಿತರ ಗ್ರಾಮೀಣ ಆಟಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ ಕುಮಾರ ಅವರು ಮಾತನಾಡಿ ಶಾಸಕ ರವಿಕುಮಾರ್ ಅವರು ಬೂದನೂರು ಉತ್ಸವ ಆಯೋಜನೆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ಉತ್ಸವವನ್ನು ಈಗಾಗಲೇ ಬೂದನೂರಿನಲ್ಲಿ ಆಯೋಜಿಸಿ ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಸದರಿ ವರ್ಷವೂ ಸಹ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಉತ್ಸವ ನಡೆಯುವ ಸ್ಥಳದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಉತ್ಸವಕ್ಕೆ ಬರುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ, ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಿ. ಉತ್ಸವದಲ್ಲಿ ವಿವಿಧ ಮಳಿಗೆಗಳನ್ನು ತೆರೆಯಲಾಗುವುದು ಮತ್ತು ಆಹಾರ ಮೇಳವನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್ ಹಾಗೂ ಬುದನೂರಿನ ಮುಖಂಡರುಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.‌

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಟ್ರಂಪ್‌ ಹೊಸ ಧಮಕಿ

“ಅಕ್ಷರ ಹೊಸ ಕಾವ್ಯ” ವಸಂತ ಕವಿಗೋಷ್ಠಿ ಇಂದು ಸಂಜೆ

ಎಐ ಹೊಡೆತಕ್ಕೆ ಐಟಿ ಆದಾಯ ಕುಂಟಿತ

Leave a Comment