ಪಾಲನೆ ನ್ಯೂಸ್
ಮಂಡ್ಯ: ಕನ್ನಡದ ಐಕ್ಯತೆಯ ಪ್ರತೀಕವಾಗಿ ನಮ್ಮ ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಮತ್ತು ನಾಡು–ನುಡಿಯ ಮೇಲಿನ ಅಭಿಮಾನವನ್ನು ಜನಮನದಲ್ಲಿ ಮೂಡಿಸುವ ಉದ್ದೇಶದಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರ ಡಿಸೆಂಬರ್ 20, 21 ಹಾಗೂ 22ರಂದು ಅತ್ಯಂತ ಅರ್ಥಪೂರ್ಣವಾಗಿ, ವೈಭವಯುತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡಿದ್ದು, ನಾಡಿನ ಸಮಸ್ತರಿಂದ ಪ್ರಶಂಸೆಗೆ ಪಾತ್ರವಾಗಿದೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕನ್ನಡ ಭವನವನ್ನು ನಿರ್ಮಿಸಬೇಕು ಎಂಬ ಅಭಿಲಾಷೆಯನ್ನು ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರು ಹಾಗೂ ಮಂಡ್ಯ ಜಿಲ್ಲೆಯ ಜನತೆ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ, ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಿದ ಸವಿನೆನಪಿಗಾಗಿ, ಸಮ್ಮೇಳನದಲ್ಲಿ ವಿವಿಧ ಮೂಲಗಳಿಂದ ಸಂಗ್ರಹಿಸಿದ ಹಣದ ಉಳಿತಾಯ ರೂ.2.50 ಕೋಟಿ ಹಾಗೂ ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.3.00 ಕೋಟಿ, ಒಟ್ಟು ರೂ.5.50 ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದರ ಅಂಗವಾಗಿ, ಕಟ್ಟಡ ಕಾಮಗಾರಿಗೆ ಜನವರಿ 30ರಂದು ಶಂಕುಸ್ಥಾಪನೆ ನೆರವೇರಿಸಲಾಗಿದೆ.

ಇದೇ ಸಂದರ್ಭದಲ್ಲಿ ದಿನಾಂಕ 07.02.2026ರಂದು ಸಭೆ ನಡೆಸಲಾಗಿದ್ದು, ಕನ್ನಡ ಭವನ ಕಟ್ಟಡದ ನೀಲ ನಕಾಶೆ, ರೂಪರೇಷೆ ಹಾಗೂ ಇತರೆ ಸಂಬಂಧಿತ ವಿಚಾರಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ, ಕನ್ನಡ ಭವನ ಕಟ್ಟಡವನ್ನು ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನಾಡು–ನುಡಿಯ ವೈಭವವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
