ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ : ಪಿ. ರವಿಕುಮಾರ್
ಪಾಲನೆ ನ್ಯೂಸ್
ಮಂಡ್ಯ: ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ ಹಿತದೃಷ್ಟಿಯಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆ.ಡಿ.ಪಿ) ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಿಗಳ ಕೊರತೆ ಆಗದಂತೆ ಔಷಧಿಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಗದಂತೆ ಬಸರಾಳು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸುವಂತೆ ಹಾಗೂ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿಆಂಬುಲೆನ್ಸ್ ವ್ಯವಸ್ಥೆಯನ್ನು 24×7 ಕಲ್ಪಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಅತೀ ಹೆಚ್ಚು ಬಿಸಿಲು ವಾತಾವರಣ ಇರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಿ ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಕಾರ್ಯಕ್ರಮಗಳನ್ನು ಮಾಡಬೇಕು ಹಾಗೂ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಗಳನ್ನು ಹೆಚ್ಚಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು.
ವಿದ್ಯ ವಿಕಾಸ ಯೋಜನೆಯಡಿಗೆ 2025 -26 ನೇ ಸಾಲಿನ ಶಾಲಾ ಮಕ್ಕಳಿಗೆ ಸಮವಸ್ತ್ರಗಳನ್ನು ನೀಡುವಂತೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ದಾಖಲೆಗಳನ್ನು ಪರಿಶೀಲಿಸಿ ಶಾಲೆಗಳ ಖಾತೆ ಮಾಡಿಸುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕೃಷಿ ಇಲಾಖೆಯು ಜಿಲ್ಲೆಯ ರೈತರಿಗೆ ರಸ ಗೊಬ್ಬರದ ಕೊರತೆ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಹಾಗೂ ಬಿತ್ತನೆ ಬೀಜ ವ್ಯವಸ್ಥೆಯನ್ನು ಕಲ್ಪಿಸಬೇಕು. ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿ ಪ್ರಚಾರ ಮಾಡಬೇಕು ಎಂದರು.
ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ಕಾರದ ಯೋಜನೆಯಡಿ ಜಾನುವಾರುಗಳು ಮರಣ ಹೊಂದಿದ ನಂತರ ಜಾನುವಾರುಗಳ ಮರಣ ದಾಖಲಾತಿಯನ್ನು ಪರಿಶೀಲಿಸಿ ಸಹಾಯಧನ ನೀಡುವುದರ ಬಗ್ಗೆ ಜನರಿಗೆ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು ಎಂದರು.
ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟ ಆಹಾರವನ್ನು ಒದಗಿಸಬೇಕು. ಬಾಣಂತಿಯರಿಗೆ ಮನೆ ಮನೆಗೆ ಆಹಾರ ಪದಾರ್ಥಗಳು ತಲುಪುವಂತೆ ಕ್ರಮವಹಿಸಬೇಕು.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿ ತಿಂಗಳು ಸಭೆ ನಡೆಸಿ ಯೋಜನೆಗಳ ನ್ಯೂನತೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು.ಹಾಗೂ
ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆ ಆಗದಂತೆ ಬೆಳಿಗ್ಗೆ ಹಾಗೂ ಸಂಜೆ ರೂಟ್ ಬಸ್ ಗಳನ್ನು ಹೆಚ್ಚುವರಿಯಾಗಿ ಬಿಡುವಂತೆ ಹೇಳಿದರು.
ಬೇಸಿಗೆಯ ಸಮಯದಲ್ಲಿ ವಿದ್ಯುತ್ ಅನ್ನು ಕಡಿತಗೊಳಿಸದಂತೆ ವಿದ್ಯುತ್ ಕಾಮಗಾರಿಯನ್ನು ಕಡಿಮೆ ಸಮಯದಲ್ಲಿ ಕಾರ್ಯಗತಗೊಳಿಸುವಂತೆ ಕ್ರಮ ವಹಿಸಿ ಹಾಗೂ ರೈತರ ಜಮೀನಿಗೆ ವಿದ್ಯುತ್ ಕೊರತೆಯಾಗದಂತೆ ಅಧಿಕಾರಿಗಳು ಗಮನ ಹರಿಸಿ ಎಂದರು.
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಪ್ರತಿ ಗ್ರಾಮಗಳಲ್ಲೂ ಪರಿಶೀಲನೆ ನಡಸಿ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಿದ್ಯಾರ್ಥಿ ನಿಲಯಗಳಿಗೆ ಉತ್ತಮ ಹಾಗೂ ಗುಣಮಟ್ಟ ಆಹಾರ ಹಾಗೂ ಸುಚಿತ್ವವಾದ ವಾತಾವರಣ ಕಾಪಾಡಿಕೊಳ್ಳುವಂತೆ ಕ್ರಮ ವಹಿಸಿ ಮತ್ತು ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.

ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಪಿ. ಪ್ರಕಾಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಶಿವಲಿಂಗಯ್ಯ, DYSP ಲಕ್ಷ್ಮೀನಾರಾಯಣ್ ಪ್ರಸಾದ್ ತಹಸೀಲ್ದಾರ್ ವಿಶ್ವನಾಥ್,
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸದಸ್ಯರಾದ ಹೆಚ್. ಕೆ.ರುದ್ರಪ್ಪ ಹಾಗೂ ತಾಲ್ಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
