ಪಾಲನೆ ನ್ಯೂಸ್
ಬೆಂಗಳೂರು : ಸಿಇಟಿ ವೇಳೆ ನಗರದ ಖಾಸಗಿ ಕಾಲೇಜಿನಲ್ಲಿ ಉದ್ದೇಶಪೂರ್ವಕವಾಗಿ ಮೂವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಿರುವ ಕಾರಣ ಮುಂದಿನ ದಿನಗಳಲ್ಲಿ ಕೆಇಎ ಮೂಲಕ ನಡೆಸುವ ಪರೀಕ್ಷೆಗಳನ್ನು ಆ ಕಾಲೇಜಿನಲ್ಲಿ ನಡೆಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವರದಿ ಸಲ್ಲಿಸಲಾಗಿದೆ ಎಂದರು. ಘಟನೆ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಚಿಸಿದ್ದ ತಂಡ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಸಿಬ್ಬಂದಿ ಹಾಗೂ ತೊಂದರೆಗೊಳಗಾಗಿರುವ ಮೂವರು ವಿದ್ಯಾರ್ಥಿಗಳ ಹೇಳಿಕೆಯನ್ನೂ ಪಡೆದು ನೀಡಿದ ತನಿಖಾ ವರದಿ ಆಧಾರದ ಮೇಲೆ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದರು.

ವಿದ್ಯಾರ್ಥಿಗಳು ಧರಿಸುವ ವಸ್ತ್ರದ ವಿಚಾರವಾಗಿ ಸೂಕ್ಷ್ಮತೆಯನ್ನು ಹೊಂದಿರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಒಬ್ಬ ವಿಶೇಷ ಅಧಿಕಾರಿಯನ್ನು ನೇಮಿಸಿ ಅವರಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ. ಜನಿವಾರ, ಮಾಂಗಲ್ಯಸರ ಸೇರಿದಂತೆ ಪರೀಕ್ಷಾ ಕೇಂದ್ರದೊಳಗೆ ಅನುಮತಿಸುವ ಹಾಗೂ ಅನುಮತಿ ಇಲ್ಲದ ವಸ್ತುಗಳ ಕುರಿತು ಸಿಬ್ಬಂದಿಗೆ ಸೂಕ್ತ ತರಬೇತಿ ಮತ್ತು ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಆದರೂ, ಮೂವರು ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಲಾಗಿದೆ. ಇದರ ಹಿಂದೆ ದುರುದ್ದೇಶ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
