ಪಾಲನೆ ನ್ಯೂಸ್
ಮಂಡ್ಯ: ನಗರಾಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿಗಳು ಇಂದು ನಡೆಸಿದರು.
ನಗರ ಸ್ಥಳೀಯ ಸಂಸ್ಥೆಗಳ ಆದಾಯ ವೃದ್ಧಿ ಕುರಿತು, ಆಸ್ತಿ ತೆರಿಗೆ, ನೀರಿನ ತೆರಿಗೆ, ಅಂಗಡಿ–ಮಳಿಗೆಗಳ ಬಾಡಿಗೆ, ಜಾಹೀರಾತು ತೆರಿಗೆ, ಉದ್ದಿಮೆ ಪರವಾನಗಿ ಶುಲ್ಕ, ನೆಲ ಬಾಡಿಗೆ, ವಾಹನ ನಿಲ್ದಾಣ ಶುಲ್ಕ, ಮಾರುಕಟ್ಟೆ, ಕಸಾಯಿ ಖಾನೆ ಹಾಗೂ ಮೊಬೈಲ್ ಟವರ್ ಬಾಡಿಗೆ ವಸೂಲಾತಿಯನ್ನು ಗುರಿ ನಿಗದಿ ಮಾಡಿಕೊಂಡು ಕಟ್ಟುನಿಟ್ಟಾಗಿ ವಸೂಲಾತಿ ಕೈಗೊಳ್ಳುವಂತೆ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದ ಆಸ್ತಿಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಲಾಯಿತು.
ಕೇಂದ್ರ ಸರ್ಕಾರದ ಯೋಜನೆಗಳಾದ NGT ಕಾಮಗಾರಿಗಳು, ಸ್ವಚ್ಛ ಭಾರತ್ ಅಭಿಯಾನ, ಅಮೃತ್ ಯೋಜನೆ, ಪ್ರಧಾನ ಮಂತ್ರಿ ಆವಾಸ ಯೋಜನೆ, 15ನೇ ಹಣಕಾಸು ಆಯೋಗ ಯೋಜನೆ, NULM (ನಲ್ಮ್) ಯೋಜನೆ ಹಾಗೂ PM ಸ್ವನಿಧಿ ಯೋಜನೆಗಳ ಭೌತಿಕ ಹಾಗೂ ಹಣಕಾಸು ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಯೋಜನೆ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ಕೌಶಲ್ಯಾಭಿವೃದ್ಧಿ ಅಧಿಕಾರಿ, ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರದ ಯೋಜನೆಗಳಾದ ನಗರೋತ್ಥಾನ, PKGB ಯೋಜನೆ, SFC ಮುಕ್ತ ನಿಧಿ, ಬಂಡವಾಳ ಸೃಜನೆ, ವಿಶೇಷ ಅನುದಾನ, SFC ಕುಡಿಯುವ ನೀರು ಯೋಜನೆಗಳು, SCSP, TSP, ಟೆಲ್ಟ್ ಯೋಜನೆ, CCMS, LED ಬೀದಿ ದೀಪ ಅನುಷ್ಠಾನ ಯೋಜನೆ ಹಾಗೂ ವಸತಿ ಯೋಜನೆಗಳು (ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ನಿವೇಶನ ಯೋಜನೆ)ಗಳ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಪ್ರಗತಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇಂದಿರಾ ಕ್ಯಾಂಟಿನ್ ಕುರಿತು, ಎಲ್ಲಾ ಕ್ಯಾಂಟಿನ್ಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ನಿಗದಿತ ಸಮಯಕ್ಕೆ ಉಪಹಾರ–ಮಧ್ಯಾಹ್ನ–ರಾತ್ರಿ ಊಟ ವಿತರಣೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಯಿತು. ಲಾಭಾರ್ಥಿಗಳಿಗೆ ತೊಂದರೆ ಆಗದಂತೆ ನಿರಂತರ ಸರಬರಾಜು, ಸಿಬ್ಬಂದಿ ಹಾಜರಾತಿ, ದೂರುಗಳ ತ್ವರಿತ ಪರಿಹಾರ ಹಾಗೂ ನಿಯಮಿತ ಪರಿಶೀಲನೆ ನಡೆಸುವಂತೆ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಇತರೆ ವಿಷಯಗಳ ಅಡಿಯಲ್ಲಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಯಿತು. ಅಲ್ಲದೆ CCMS ಸಂಬಂಧಿತ ನ್ಯಾಯಾಲಯ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪ್ರಗತಿ ವರದಿ ಸಲ್ಲಿಸುವಂತೆ, ಹಾಗೂ E-ಖಾತಾ ಅಭಿಯಾನ ಯೋಜನೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸಭೆಯ ಅಂತ್ಯದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಎಲ್ಲಾ ಯೋಜನೆಗಳನ್ನು ಪಾರದರ್ಶಕತೆ, ಗುಣಮಟ್ಟ ಹಾಗೂ ಸಮಯಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕು ಹಾಗೂ ಇಲಾಖೆಗಳ ನಡುವೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಯೋಜನೆ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕಾರ್ಯಪಾಲಕ ಅಭಿಯಂತರರು – ಜಿಲ್ಲಾ ನಗರಾಭಿವೃದ್ಧಿ ಕೋಶ, ಪೌರಾಯುಕ್ತರು – ಮಂಡ್ಯ ಹಾಗೂ ಮದ್ದೂರು, ಮುಖ್ಯಾಧಿಕಾರಿಗಳು – ಮಳವಳ್ಳಿ, ಶ್ರೀರಂಗಪಟ್ಟಣ, ನಾಗಮಂಗಲ, ಬೆಳ್ಳೂರು ಹಾಗೂ ಕೆ.ಆರ್. ಪೇಟೆ, ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

