ಪಾಲನೆ ನ್ಯೂಸ್
ಮಂಡ್ಯ: ಮದ್ದೂರು ತಾಲ್ಲೂಕು ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ಎಲ್ಲಾ ಯೋಜನೆಗಳಲ್ಲಿ ಮಾರ್ಚ್ ಅಂತ್ಯದೊಳಗೆ ಶೇಕಡ 100ರಷ್ಟು ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಮದ್ದೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಅಭ್ಯಾಸ ಪರೀಕ್ಷೆಯಲ್ಲಿ ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳು ಮತ್ತು ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಗಮನ ಹರಿಸಬೇಕು ಹಾಗೂ ಈ ಸಂಬಂಧ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ಈಗಾಗಲೇ ತಿಳಿಸಿರುವಂತೆ ಪ್ರತೀ ದಿನ ತಮಗೆ ವಹಿಸಲಾಗಿರುವ ಶಾಲೆಗಳಿಗೆ ಭೇಟಿ ಫಲಿತಾಂಶ ಉತ್ತಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದರು.
ಮದ್ದೂರು ತಾಲ್ಲೂಕಿನಲ್ಲಿ 0-6 ವರ್ಷದೊಳಗಿನ ಮಕ್ಕಳಿದ್ದು, ಎಲ್ಲಾ ಮಕ್ಕಳನ್ನು ಪರೀಕ್ಷೆಗೊಳಪಡಿಸಿ ಅಪೌಷ್ಠಿಕ ಮಕ್ಕಳನ್ನು ಗುರುತಿಸಿ SAM ಮತ್ತು MAM ಎಂದು ಪ್ರತ್ಯೇಕಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದರಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕ್ರಮವಹಿಸುತ್ತಿರುವ ಬಗ್ಗೆ ಸಿಡಿಪಿಓ ಮತ್ತು ಟಿಹೆಚ್ಓರವರು ಅನುಸರಣೆ ಮಾಡಬೇಕು ಎಂದು ಸೂಚಿಸಿದರು.

ನಮ್ಮ ನಡಿಗೆ ಅಕ್ಷರ ದಾಸೋಹ ಅಡುಗೆ ಮನೆ ಕಡೆಗೆ ಎಂಬ ಅಭಿಯಾನದಡಿ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಮಧ್ಯಾಹ್ನದ ಬಿಸಿ ಊಟ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಅಡುಗೆ ಕೋಣೆಯ ಸ್ವಚ್ಛತೆ, ಅಡುಗೆ ಸಿಬ್ಬಂದಿಗಳ ಸುರಕ್ಷತೆ, ಆಹಾರ ಸಾಮಾಗ್ರಿಗಳ ಗುಣಮಟ್ಟ ಮತ್ತು ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಈಗಾಗಲೇ ಸೂಚಿಸಲಾಗಿದ್ದು, ಅದರ ಮೇಲ್ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಬಿಇಓ ರವರಿಗೆ ಸೂಚಿಸಿದರು.
ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಹೋಬಳಿ ಮಟ್ಟದ ಸಭೆಗಳನ್ನು ಆಯೋಜಿಸಿ ಕುಡಿಯುವ ನೀರು ಸರಬರಾಜಿನ ಕುರಿತು ಇರುವ ಸಮಸ್ಯೆಗಳ ಪಟ್ಟಿ ಮಾಡಿ, ಅವುಗಳನ್ನು ಪರಿಹರಿಸಲು ತಿಳಿಸಲಾಗಿತ್ತು. ಆದರೆ ಈವರೆಗೆ ಯಾವುದೇ ಹೋಬಳಿಗಳಲ್ಲಿಯೂ ನೀರುಗಂಟಿಗಳು ಮತ್ತು ಪಿಡಿಓ ಗಳ ಸಭೆ ನಡೆಸಿರುವುದಿಲ್ಲ. ಈ ಬಗ್ಗೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳು ಕೂಡಲೇ ಕ್ರಮವಹಿಸಬೇಕು ಎಂದು ತಿಳಿಸಿದರು.

ಮತ್ಸ್ಯ ಸಂಜೀವಿನಿ ಯೋಜನೆಯಡಿ ಸ್ವ-ಸಹಾಯ ಸಂಘಗಳು ಗ್ರಾ.ಪಂ.ನೊಂದಿಗೆ ಕರಾರು ಒಪ್ಪಂದ ಮಾಡಿಕೊಂಡು ಮೀನು ಸಾಕಾಣೆ ಮಾಡುವ ಚಟುವಟಿಕೆಗೆ ಸಂಬಂಧಿಸಿದಂತೆ ಈವರೆಗೆ 1 ಕೆರೆಗೆ ಮಾತ್ರ ಮೀನು ಮರಿಗಳನ್ನು ಬಿಡಲಾಗಿದ್ದು, ಉಳಿದ ಕೆರೆಗಳಿಗೂ ಮೀನು ಮರಿಗಳನ್ನು ಬಿಡಲು ಸೂಕ್ತ ಕ್ರಮವಹಿಸುವಂತೆ ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆರವರಿಗೆ ಸೂಚಿಸಿದರು.
ನರೇಗಾ ಯೋಜನೆಯ ಪ್ರಗತಿಗೆ ಸಂಬಂಧಿಸಿದಂತೆ, ಅನುಷ್ಟಾನ ಇಲಾಖೆಗಳಾದ ಕೃಷಿ, ತೋಟಗಾರಿಕೆ, ರೇಷ್ಮೇ ಇಲಾಖೆಗಳು ನಿಗಧಿಪಡಿಸಿರುವ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ (ಆಡಳಿತ) ಹಾಗೂ ಮದ್ದೂರು ತಾ.ಪಂ.ನ ಆಡಳಿತಾಧಿಕಾರಿಗಳಾದ ಶಿವಲಿಂಗಯ್ಯ, ಮದ್ದೂರು ತಾ.ಪಂ. ಇಓ ರಾಮಲಿಂಗಯ್ಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಧುಸೂದನ್, ತಾ.ಪಂ. ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

