ಪಾಲನೆ ನ್ಯೂಸ್

ನವದೆಹಲಿ: ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿನ ಹನುಮನಿಗೆ ಪೂಜೆ ಸಲ್ಲಿಸಲು ಹಕ್ಕು ನೀಡುವಂತೆ ಅರ್ಚಕ ವಿದ್ಯಾದಾಸ್ ಬಾಬಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನಲ್ಲಿಯೇ ಅರ್ಜಿ ವಿಚಾರಣೆ ಮುಂದುವರಿಸಲು ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ಸೂಚನೆ

ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ಹಕ್ಕಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅರ್ಚಕ ವಿದ್ಯಾದಾಸ್ ಬಾಬಾ, ತಮಗೆ ಪೂಜೆ ಸಲ್ಲಿಸಲು ಹಕ್ಕು ನೀಡುವಂತೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಜೋಯಮಲ್ಯ ಬಾಗಿ ಅವರಿದ್ದ ಪೀಠವು, ಈ ಹಿಂದೆ ಪೂಜೆ ಸಲ್ಲಿಕೆಗೆ ತಾತ್ಕಾಲಿಕ ಅನುಮತಿ ನೀಡಲಾಗಿದೆ ಎಂದಿತು. ವಿದ್ಯಾದಾಸ್ ಬಾಬಾ ಪರ ಹಾಜರಿದ್ದ ವಕೀಲ ವಿಷ್ಣು ಶಂಕರ್ ಜೈನ್, ಸಂಪೂರ್ಣ ಹಕ್ಕಿಗಾಗಿ ಮನವಿ ಮಾಡುತ್ತಿದ್ದೇವೆ ಎಂದರು. ಅಲ್ಲದೆ, ಕರ್ನಾಟಕ ಹೈಕೋರ್ಟ್ನಲ್ಲಿಯೂ ಈ ಅರ್ಜಿ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಈ ಅರ್ಜಿ ಕರ್ನಾಟಕ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಸಂದರ್ಭದಲ್ಲಿ ನಾವು ವಿಚಾರಣೆ ನಡೆಸುವುದು ಸೂಕ್ತವಲ್ಲ, ಹೈಕೋರ್ಟ್ನಲ್ಲಿಯೇ ವಿಚಾರಣೆ ಮುಂದುವರಿಸಲು ಪೀಠ ಸೂಚನೆ ನೀಡಿತು.
ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದಲ್ಲಿ ಅರ್ಚಕ ವಿದ್ಯಾದಾಸ್ ಬಾಬಾರಿಗೆ ಪೂಜೆಗೆ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು. ಅಲ್ಲದೆ ಬೆಟ್ಟದ ಮೇಲೆ ಅವರಿಗೆ ಮೂಲ ಸೌಲಭ್ಯವಿರುವ ಕೊಠಡಿ ನೀಡಬೇಕು ಎಂದು ತಿಳಿಸಿತ್ತು. ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಬೆಟ್ಟಕ್ಕೆ ಭೇಟಿ ನೀಡಿದ್ದ ವೇಳೆ ಬೇರೊಬ್ಬ ಅರ್ಚಕರು ಪೂಜೆ ಸಲ್ಲಿಸಿದ್ದರು. ಇದಕ್ಕೆ ವಿದ್ಯಾದಾಸ್ ವಿರೋಧ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾದಾಸ್ ಬಾಬಾ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
