ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ನಂದಿನಿ.ಕೆ.ಆರ್. ಸೂಚನೆ
ಪಾಲನೆ ನ್ಯೂಸ್
ಮಂಡ್ಯ: ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಗುರುತಿಸಿ, ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರುಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಸೂಚಿಸಿದರು.
ಗುರುವಾರ ಜಿಲ್ಲಾ ಪಂಚಾಯತ್ ನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಗ್ರಾಮಗಳಿಗೆ ನೀರಿನ ಕೊರತೆ ಎದುರಾಗದಂತೆ ಸಾಕಷ್ಟು ಪ್ರಮಾಣದ ಗುಣಮಟ್ಟದ ನೀರನ್ನು ಸರಬರಾಜು ಮಾಡಲು ಕ್ರಮ ವಹಿಸುವಂತೆ ಸೂಚಿಸಿದರು.

ನೀರಿನ ಗುಣಮಟ್ಟ ಪರಿಶೀಲಿಸಲು ಸೂಚನೆ
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳು ಎಫ್.ಟಿ,ಕೆ. ಮೂಲಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಒಂದು ವೇಳೆ ನೀರು ಕುಡಿಯಲು ಯೋಗ್ಯವಿಲ್ಲವೆಂದು ಕಂಡುಬಂದಲ್ಲಿ ಬದಲೀ ಮೂಲದಿಂದ ನೀರು ಸರಬರಾಜು ಮಾಡಬೇಕೆಂದು ಸೂಚಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆಗೊಳಿಸಿ

ಜಿಲ್ಲೆಯಾದ್ಯಂತ ನಿರ್ಮಾಣ ಮಾಡಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾಚರಣೆಗೊಳಿಸಬೇಕು. ಘಟಕಗಳು ದುರಸ್ತಿಗೆ ಬಂದ ತಕ್ಷಣವೇ ಅವುಗಳನ್ನು ರಿಪೇರಿ ಮಾಡಲು ಸಂಬಂಧಪಟ್ಟ ಏಜೆನ್ಸಿಗೆ ಸೂಚಿಸಬೇಕು. ಒಂದು ವೇಳೆ ಘಟಕವು ಈಗಾಗಲೇ ಗ್ರಾ.ಪಂ.ಗೆ ಹಸ್ತಾಂತರವಾಗಿದ್ದಲ್ಲಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಘಟಕವು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ತಾ.ಪಂ. ಇಓಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಗುಣಮಟ್ಟದಿಂದ ನಡೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಆಯಾ ಗ್ರಾಮ ಪಂಚಾಯತ್ ನಲ್ಲಿ ಕ್ರಿಯಾಶೀಲರಾಗಿರುವ ಒಬ್ಬರು ನೀರುಗಂಟಿಯನ್ನು ಗುರುತಿಸಿ ನೀರು ಸರಬರಾಜು ಯೋಜನೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಬಗ್ಗೆ ತರಬೇತಿ ನೀಡಿ ಸಜ್ಜುಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಪ್ರಮೋದ್ ಕುಮಾರ್ ಎನ್.ಜಿ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಸುಷ್ಮಾ, ರಾಮಲಿಂಗಯ್ಯ, ಶ್ರೀನಿವಾಸ್, ಲೋಕೆಶ್ ಮೂರ್ತಿ, ಸತೀಶ್, ವೀಣಾ ಸೇರಿದಂತೆ ಜಿಲ್ಲೆಯ ಎಲ್ಲಾ ಸಹಾಯಕ ಕಾರ್ಯಪಾಲಕ ಅಭಿಯಂತರುಗಳು ಹಾಜರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
